ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.
A Kannada book by Akshara Prakashana / ಅಕ್ಷರ ಪ್ರಕಾಶನ
ಪಿ. ಲಂಕೇಶರು 8 ಮಾರ್ಚ್ 1935ರಂದು ಶಿವಮೊಗ್ಗ ಜಿಲ್ಲೆಯ ಕೊನಗವಳ್ಳಿ ಗ್ರಾಮದ ನಂದಿಬಸಪ್ಪ ಮತ್ತು ದೇವೀರಮ್ಮ ದಂಪತಿಗಳ ಪುತ್ರನಾಗಿ ಜನಿಸಿದರು. ಇವರು ತಮ್ಮ ಶಿಕ್ಷಣವನ್ನು ಶಿವಮೊಗ್ಗ, ಬೆಂಗಳೂರುಗಳಲ್ಲಿ ಮಾಡಿ ಮೈಸೂರಿನ ಮಹಾರಾಜಾ ಕಾಲೇಜಿನಿಂದ ಇಂಗ್ಲೀಷ್ ಎಂ.ಎ. ಪದವಿ ಪಡೆದರು. ಇವರು 1959ರಿಂದ 1962ರವರೆಗೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ, 1962ರಿಂದ 1965ರವರೆಗೆ ಸೆಂಟ್ರಲ್ ಕಾಲೇಜಿನಲ್ಲಿ ಹಾಗೂ ಸರ್ಕಾರಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಒಂದು ವರ್ಷ, 1966ರಿಂದ 1978ರವರೆಗೆ ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ನಂತರ ಲಂಕೇಶ್ ಪತ್ರಿಕೆಯನ್ನು ಶುರುಮಾಡಿದರು. ಇವರ ‘ಕಲ್ಲು ಕರಗುವ ಸಮಯ’ ಕೃತಿಗೆ 1993ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿತು. 1986ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಲಭಿಸಿತು. ‘ಪಲ್ಲವಿ’ ಚಲನಚಿತ್ರ ನಿರ್ದೇಶನಕ್ಕೆ ರಾಷ್ಟ್ರಪ್ರಶಸ್ತಿ ಲಭಿಸಿತು. ಇವರು 25 ಜನವರಿ 2000ದಂದು ನಿಧನರಾದರು.